ಡೈಲಿ ವಾರ್ತೆ: 21/NOV/2025

ಉಡುಪಿ| ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿ ರವಾನೆ – ಇಬ್ಬರ ಬಂಧನ

ಉಡುಪಿ : ದೆಹಲಿಯಲ್ಲಿ ಕಾರು ಬಾಂಬ್ ಸ್ಫೋಟ ದುರಂತಕ್ಕೆ ಸಂಬಂಧಪಟ್ಟಂತೆ ಈಗಾಗಲೇ ತನಿಖಾ ಸಂಸ್ಥೆಗಳು ತನಿಖೆ ನಡೆಸುತ್ತಿವೆ. ಈ ಒಂದು ಪ್ರಕರಣ ತನಿಖೆ ನಡೆಯುತ್ತಿರುವಾಗಲೇ ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆಯ ಗೌಪ್ಯ ಮಾಹಿತಿ ಹಾಗೂ ಕೆಲವು ರಹಸ್ಯಗಳನ್ನು ಕಳುಹಿಸಿರುವ ಆರೋಪದ ಮೇರೆಗೆ ಶಿಪ್ ಯಾರ್ಡ್ ನ ಇಬ್ಬರು ನೌಕರರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಭಾರತದ ನೌಕಾ ಸೇನೆಗೆ ಸಂಬಂಧಪಟ್ಟ ಗೌಪ್ಯ ಪಟ್ಟಿ, ಇತರ ಗೌಪ್ಯ ಮಾಹಿತಿಗಳನ್ನು ವಾಟ್ಸಪ್‌ ಹಾಗೂ ಫೇಸ್‌ಬುಕ್ ಮೂಲಕ ಅನಧಿಕೃತವಾಗಿ ಶೇರ್‌ ಮಾಡಿ, ಅಕ್ರಮ ಲಾಭ ಪಡೆದಿರುವ ಕೊಚ್ಚಿನ್ ಶಿಪ್ ಯಾರ್ಡ್‌ನ ಇಬ್ಬರು ನೌಕರರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.

ಉತ್ತರ ಪ್ರದೇಶ ಮೂಲದ ರೋಹಿತ್ ಮತ್ತು ಸಂತ್ರಿ ಬಂಧಿತ ಆರೋಪಿಗಳು.

ಬಂಧಿತರಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದ್ದು ನಾಳೆ ಪೊಲೀಸ್ ಕಸ್ಟಡಿಗೆ ಪಡೆಯಲಾಗುವುದು ಎಂದು ತುರ್ತು ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ.