
ಡೈಲಿ ವಾರ್ತೆ: 19/DEC/2025
ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಳಗಾವಿ: ಡಿಸಿಎಂ ಡಿಕೆ ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿ, ಹಿರಿಯ ಕೆಎಎಸ್ ಅಧಿಕಾರಿ ರಾಜೇಂದ್ರ ಪ್ರಸಾದ್ ಅವರಿದ್ದ ಕಾರು ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸವದತ್ತಿ ಬಳಿ ನಡೆದಿದೆ.
ಸವದತ್ತಿ ಪಟ್ಟಣದ ನಿವಾಸಿ ಮಂಜುನಾಥ್ ಬೈರ್ನಟ್ಟಿ (30) ಮೃತ ದುರ್ದೈವಿ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಒಡೆತನದ ಹರ್ಷಾ ಸಕ್ಕರೆ ಕಾರ್ಖಾನೆಗೆ ಕೆಲಸಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.
ಕಾರು ಗುದ್ದಿ ತಲೆ ಭಾಗಕ್ಕೆ ಗಂಭೀರ ಗಾಯವಾಗಿ ಮಂಜುನಾಥ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ರಭಸಕ್ಕೆ ರಾಜೇಂದ್ರ ಪ್ರಸಾದ್ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕ್ರಿಸ್ಟಾ ಕಾರು ಪಲ್ಟಿಯಾಗಿದೆ.
ರಾಜೇಂದ್ರ ಪ್ರಸಾದ್, ಕಾರು ಚಾಲಕನಿಗೂ ಗಂಭೀರ ಗಾಯವಾಗಿದ್ದು ಧಾರವಾಡ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ರಾಜೇಂದ್ರ ಪ್ರಸಾದ್ ಅವರು ಸವದತ್ತಿಯ ರೇಣುಕಾ ಯಲ್ಲಮ್ಮನ ದರ್ಶನ ಪಡೆದು ವಾಪಸ್ ಆಗುತ್ತಿದ್ದಾಗ ಘಟನೆ ನಡೆದಿದೆ.