ಡೈಲಿ ವಾರ್ತೆ: 20/DEC/2025

ಉಡುಪಿಯಲ್ಲಿ ವೋಟ್ ಚೋರಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ರಣಕಹಳೆ- ಮಾನವ ಸರಪಳಿ ರಚಿಸಿ ಪ್ರತಿಭಟನೆ

ಉಡುಪಿ: ಕೇಂದ್ರ ಸರ್ಕಾರದ ಮತಗಳವು ಹಗರಣದ ಬಗ್ಗೆ
ಜನಜಾಗೃತಿ ಮೂಡಿಸಲು ಜಿಲ್ಲಾ ಕಾಂಗ್ರೆಸ್ ವತಿಯಿಂದ ನಡೆಯುತ್ತಿರುವ ಸಹಿ ಸಂಗ್ರಹ ಅಭಿಯಾನದ ಸಮಾರೋಪದ ಅಂಗವಾಗಿ ನಗರದ ಸಿಟಿ ಬಸ್ ನಿಲ್ದಾಣದಿಂದ ಮಣಿಪಾಲದವರೆಗೆ ಇಂದು ಮಾನವ ಸರಪಳಿ ರಚಿಸಲಾಯಿತು.

ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ವಂದೇ ಮಾತರಂ ಹಾಗೂ ಸಂವಿಧಾನ ಪೀಠಿಕೆ ಓದುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಬಳಿಕ ಮಾತನಾಡಿದ ಮಾಜಿ ಸಚಿವ ವಿನಯಕುಮಾ‌ರ್ ಸೊರಕೆ ಅವರು, ಡಾ. ಬಾಬಾ ಸಾಹೇಬ್ ಅಂಬೇಡ್ಕ‌ರ್ ನಿರ್ಮಾಣ ಮಾಡಿರುವ ಸಂವಿಧಾನಕ್ಕೆ ನಿರಂತರವಾಗಿ ಧಕ್ಕೆ ತರುವ ಕೆಲಸ ಆಗುತ್ತಿದೆ. ಕೇಂದ್ರ ಬಿಜೆಪಿ ಸರಕಾರ ಸಂವಿಧಾನವನ್ನು ಹತ್ತಿಕ್ಕಲು ಎಲ್ಲ ರೀತಿಯಲ್ಲೂ ಪ್ರಯತ್ನಿಸುತ್ತಿದೆ. ವಿರೋಧ ಪಕ್ಷದ ಮೇಲೆ ಎಲ್ಲ ರೀತಿಯ ಅಸ್ತ್ರಗಳನ್ನು ಪ್ರಯೋಗಿಸುತ್ತಾ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕೊಡಲಿ ಪೆಟ್ಟು ಕೊಡುವ ಕೆಲಸಕ್ಕೆ ಕೇಂದ್ರ ಬಿಜೆಪಿ ಸರಕಾರ ಕೈಹಾಕಿದೆ. ಇಂತಹ ಸಂದರ್ಭದಲ್ಲಿ ಜನರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಹಾಗೂ ಕೇಂದ್ರ ಸರಕಾರದ ಜನವಿರೋಧಿ ನೀತಿಗಳನ್ನು ಜನರಿಗೆ ತಿಳಿಸುವ ಸಲುವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಂತಹ ಮಹಾತ್ಮ ಗಾಂಧೀಜಿಯವರಿಗೆ ಸಂಸತ್ತಿನಲ್ಲಿ ಅವಮಾನಿಸುವ ಮೂಲಕ ಎರಡನೇ ಬಾರಿಗೆ ಅವರನ್ನು ಕೊಲೆ ಮಾಡುವ ಕಾರ್ಯಕ್ಕೆ ಬಿಜೆಪಿ ಸರಕಾರ ಮುಂದಾಗಿದೆ. ಗಾಂಧೀಜಿ ಅವರ ರಾಮರಾಜ್ಯದ ಕನಸಿಗೆ ಹೊಡೆತ ನೀಡುವ ಕೆಲಸ ಮಾಡಿದ್ದಾರೆ ಎಂದು ದೂರಿದರು.

ನಗರದ ಸಿಟಿ ಬಸ್ ನಿಲ್ದಾಣದಿಂದ ಮಣಿಪಾಲದವರೆಗೆ ನಡೆದ ಮಾನವ ಸರಪಳಿಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು.

ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಮಂಜುನಾಥ್ ಭಂಡಾರಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕೊಡವೂರು, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂ‌ರ್, ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ನಾರಾಯಣಗುರು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಂಜುನಾಥ್ ಪೂಜಾರಿ ಹೆಬ್ರಿ, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್‌ ಕಾಂಚನ್, ಮುಖಂಡರಾದ ಹರಿಪ್ರಸಾದ್ ರೈ, ಕಿಶನ್ ಹೆಗ್ಡೆ ಕೊಳ್ಳೆಬೈಲ್, ದಿನೇಶ್ ಹೆಗ್ಡೆ ಮೊಳಹಳ್ಳಿ, ಪ್ರಸಾದ್ ರಾಜ್ ಕಾಂಚನ್, ಮುನಿಯಾಲ್ ಉದಯಕುಮಾರ್ ಶೆಟ್ಟಿ, ರಾಜು ಪೂಜಾರಿ, ವೆರೋನಿಕಾ ಕರ್ನೆಲಿಯೋ, ಜ್ಯೋತಿ ಹೆಬ್ಬಾರ್ ಮೊದಲಾದವರು ಉಪಸ್ಥಿತರಿದ್ದರು.