

ಡೈಲಿ ವಾರ್ತೆ: ಫೆ./05/2026
SDPI ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದ ವತಿಯಿಂದ ಪಕ್ಷದ ಬಿಎಲ್ಎ ಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ

ಹರೇಕಳ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದ ವತಿಯಿಂದ ಮತದಾರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (SIR) ಭಾಗವಾಗಿ ಬೂತ್ ಲೆವೆಲ್ ಏಜೆಂಟ್ (ಬಿಎಲ್ಎ)ಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಎಸ್ಡಿಪಿಐ ಮಂಗಳೂರು ವಿಧಾನಸಭಾ ಕ್ಷೇತ್ರ ಉಪಾಧ್ಯಕ್ಷರಾದ ನಝೀರ್ ಪುದು ರವರ ನೇತೃತ್ವದಲ್ಲಿ ಹರೇಕಳ ಗ್ರಾಮ ಸೌಧದ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ಫೆಬ್ರವರಿ 4ರ ಬುಧವಾರದಂದು ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮವನ್ನು ಉದ್ದೇಶಿಸಿ ಎಸ್ಡಿಪಿಐ ಕ್ಷೇತ್ರ ಸಮಿತಿ ಸದಸ್ಯರಾದ ಹನೀಫ್ ಬೋಳಿಯಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ SDPI ನಗರ ಜಿಲ್ಲಾ ಉಪಾಧ್ಯಕ್ಷರಾದ ಅಶ್ರಫ್ ಅಡ್ಡೂರುರವರು ಮತದಾರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಸವಿಸ್ತಾರವಾಗಿ ಮಾತನಾಡಿ, ಬೂತ್ ಲೆವೆಲ್ ಏಜೆಂಟ್ಗಳ ಜವಾಬ್ದಾರಿ, ಮನೆಮನೆಗೆ ಭೇಟಿ ನೀಡಿ ಸಾರ್ವಜನಿಕರಿಗೆ ಸಮರ್ಪಕವಾದ ಮಾಹಿತಿ ನೀಡುವ ಬಗ್ಗೆ, ಅರ್ಹ ಮತದಾರರ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಅಳಿಕೆ ಪ್ರಕ್ರಿಯೆಗಳ ಬಗ್ಗೆ ಸ್ಪಷ್ಟವಾದ ಮಾರ್ಗದರ್ಶನ ನೀಡಿದರು.
ಈ ಸಂದರ್ಭದಲ್ಲಿ ಎಸ್ಡಿಪಿಐ ಮಂಗಳೂರು ನಗರ ಜಿಲ್ಲಾ ಕೋಶಾಧಿಕಾರಿ ಯಾಸಿನ್ ಅರ್ಕುಳ ಉಪಸ್ಥಿತರಿದ್ದು SIR ಸಾಧಕ ಬಾಧಕದ ಕುರಿತು ಸಮಾರೋಪ ಭಾಷಣ ಮಾಡಿದರು.
ಸ್ನೇಹ ಸಮ್ಮಿಲನ ಕಾರ್ಯಕ್ರಮದ ಮೂಲಕ ಪಕ್ಷದ ಬೂತ್ ಲೆವೆಲ್ ಏಜೆಂಟ್ಗಳು SIR ಪ್ರಕ್ರಿಯೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಅಗತ್ಯವಾದ ಮಾರ್ಗದರ್ಶನವನ್ನು ಪಡೆದುಕೊಂಡರು.
ಕಾರ್ಯಕ್ರಮದಲ್ಲಿ ಎಸ್ಡಿಪಿಐ ಮಂಗಳೂರು ವಿಧಾನಸಭಾ ಕ್ಷೇತ್ರ ಕಾರ್ಯದರ್ಶಿ ಉಬೈದ್ ಅಮ್ಮೆಂಬಳರವರು ಸ್ವಾಗತಿಸಿ, ಕ್ಷೇತ್ರ ಸಮಿತಿ ಸದಸ್ಯರಾದ ಆರೀಫ್ ಬೋಳಿಯಾರ್ ಧನ್ಯವಾದಗೈದರು.