ಡೈಲಿವಾರ್ತೆ:07/ಏಪ್ರಿಲ್ /2026

ಶಿವಮೊಗ್ಗದಲ್ಲಿ ದಾರುಣ ಘಟನೆ: ನರ್ಸ್ ಯುವತಿ ಭದ್ರಾ ನದಿಗೆ ಹಾರಿ ಆತ್ಮಹತ್ಯೆ

ಶಿವಮೊಗ್ಗ, ಎಪ್ರಿಲ್ 7: ನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದ ಯುವತಿಯೊಬ್ಬರು ಭದ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಸೋಮವಾರ ಸಂಜೆ ನಡೆದಿದೆ.

ಮೃತರನ್ನು ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮದ ನಿವಾಸಿ ರನ್ಯಾ ಬೇಸಿಲ್ (30) ಎಂದು ಗುರುತಿಸಲಾಗಿದೆ.

ಸೋಮವಾರ ಸಂಜೆ ತಮ್ಮ ಕರ್ತವ್ಯ ಮುಗಿಸಿ ಮನೆಗೆ ಬಂದಿದ್ದ ರನ್ಯಾ, ಕೆಲವೇ ಕ್ಷಣಗಳಲ್ಲಿ ಮತ್ತೆ ಹೊರಗೆ ತೆರಳಿದ್ದು, ಮುಡುಬ ಸಮೀಪದ ಸೇತುವೆ ಬಳಿ ತಮ್ಮ ಸ್ಕೂಟರ್ ನಿಲ್ಲಿಸಿ ಅಚಾನಕ್ ನದಿಗೆ ಜಿಗಿದಿದ್ದಾರೆ. ಘಟನೆ ಗಮನಿಸಿದ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಎನ್.ಆರ್.ಪುರ ಪೊಲೀಸ್ ಹಾಗೂ ರಕ್ಷಣಾ ಸಿಬ್ಬಂದಿ ಸುದೀರ್ಘ ಶೋಧ ಕಾರ್ಯಾಚರಣೆ ನಡೆಸಿ ತಡರಾತ್ರಿ ವೇಳೆ ಮೃತದೇಹವನ್ನು ಹೊರತೆಗೆದಿದ್ದಾರೆ.
ಯುವತಿಯ ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ಕೆಲಸದ ಒತ್ತಡ ಅಥವಾ ವೈಯಕ್ತಿಕ ಸಮಸ್ಯೆಗಳ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಸಂಬಂಧ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.